ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ಧನಸಹಾಯ

ಶಾಸಕರ ನಿಧಿಯಿಂದ ನೆರವು ನೀಡಲು ಮುಂದಾದ ರಾಜ್ಯ ಕಾಂಗ್ರೆಸ್

 | 
ಕೋವಿಡ್ ಲಸಿಕೆ ಖರೀದಿಗೆ ಕಾಂಗ್ರೆಸ್ ನಿಂದ 100 ಕೋಟಿ ರೂ ಧನಸಹಾಯ

ಬೆಂಗಳೂರು: ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ರಾಜ್ಯ ಕಾಂಗ್ರೆಸ್ ಸಹಾಯ ಹಸ್ತ ನೀಡಿದೆ. ಈ ವಿಷಯವನ್ನು ವಿರೋಧ ಪಕ್ಷದ ನಾಯಕರಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕಟಿಸಿದ್ದಾರೆ.

ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಜೊತೆ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ಪ್ರತಿ ಶಾಸಕರು ಒಂದು ಕೋಟಿ ರೂಪಾಯಿಗಳನ್ನು ನೀಡುವ ಮೂಲಕ 100 ಕೋಟಿ ರೂಪಾಯಿ ಸಂಗ್ರಹ ಮಾಡಿ ಸರ್ಕಾರಕ್ಕೆ ನೀಡುತ್ತೇವೆ ಎಂದು ಹೇಳಿದ್ದಾರೆ.

ಶಾಸಕರು, ಸಂಸದರಿಗೆ ಪ್ರತಿವರ್ಷ ನೀಡಲಾಗುವ ಪ್ರದೇಶಾಭಿವೃದ್ಧಿ ನಿಧಿಯಿಂದ ತಲಾ 1 ಕೋಟಿ ರೂಪಾಯಿಗಳನ್ನು ನೀಡಲಾಗುತ್ತದೆ. ಶಾಸಕರು, ವಿಧಾನಪರಿಷತ್ ಸದಸ್ಯರಿಗೆ ಪ್ರದೇಶಾಭಿವೃದ್ಧಿ ನಿಧಿಯಡಿ ತಲಾ 2 ಕೋಟಿ ರೂಪಾಯಿ, ಲೋಕಸಭಾ ಮತ್ತು ರಾಜ್ಯಸಭಾ ಸಂಸದರಿಗೆ ತಲಾ 5 ಕೋಟಿ ರೂಪಾಯಿ ಸಿಗುತ್ತದೆ, ಅದರಡಿ ರಾಜ್ಯದಲ್ಲಿರುವ 95 ಮಂದಿ ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರು ಕೊರೋನಾ ಲಸಿಕೆಗೆ ಹಣ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.

ಕೊರೋನಾ ಲಸಿಕೆ ಖರೀದಿ ಮಾಡಿ ಜನರಿಗೆ ಸರಿಯಾಗಿ ನೀಡುವಲ್ಲಿ ಕೇಂದ್ರದ ಮೋದಿ ಹಾಗೂ ರಾಜ್ಯದ ಯಡಿಯೂರಪ್ಪ ನೇತೃತ್ವದ ಸರ್ಕಾರ ವಿಫಲವಾಗಿದೆ. ಹೀಗಾಗಿ ಕಂಪೆನಿಯಿಂದ ನೇರವಾಗಿ ಖರೀದಿ ಮಾಡಲು ಅವಕಾಶ ನೀಡಿ ಎಂದು ನಾವು ಸರ್ಕಾರವನ್ನು ಕೇಳುತ್ತೇವೆ. ಲಸಿಕೆ ಉತ್ಪಾದಕ ಕಂಪೆನಿಗಳಿಂದ ನೇರವಾಗಿ ಲಸಿಕೆ ಸಂಗ್ರಹಿಸಿ ಜನರಿಗೆ ವಿತರಿಸಲು ನೆರವಾಗಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೊರೋನಾ ಲಸಿಕೆ ನೀಡಿಕೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಬೇಜವಬ್ದಾರಿಯಿಂದ ವರ್ತಿಸುತ್ತಿದೆ. ಕೋವಿಶೀಲ್ಡ್ ಲಸಿಕೆ ಡೋಸ್ ನೀಡಿಕೆಯಲ್ಲಿ 14ರಿಂದ 16 ವಾರಗಳ ಅಂತರವೇಕೆ, ಲಸಿಕೆ ನೀಡುವ ವಿಚಾರದಲ್ಲಿ ಕೂಡ ಸರ್ಕಾರ ದಿನಕ್ಕೊಂದು ಹೇಳಿಕೆ ನೀಡುತ್ತಿದೆ, ತಜ್ಞರು ಹೇಳುತ್ತಿದ್ದಾರೆ ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ನನಗನಿಸುತ್ತಿದೆ ಎಂದು ಆರೋಪಿಸಿದರು.