ಇದು ಬಡವರ ರಕ್ತ ಹೀರುವ ಸರ್ಕಾರ: ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇದು ಜನಸಾಮಾನ್ಯರು, ಬಡವರ ಪರ ಇರುವ ಸರ್ಕಾರ ಅಲ್ಲ, ಬಡವರ ರಕ್ತ ಹೀರುವ ಸರ್ಕಾರ, ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಬಳಿಕ ಮಾತನಾಡಿದ ಅವರು, ಜನ ಕೊರೋನಾ, ಸಾವು, ನೋವು, ಆರ್ಥಿಕ ಸಮಸ್ಯೆಗಳಿಂದ ಸಾಯುತ್ತಿದ್ದಾರೆ, ಅಂತಹ ಸಂದರ್ಭದಲ್ಲಿ ಗಾಯದ ಮೇಲೆ ಬರೆ ಎಳೆದಂತೆ ಪೆಟ್ರೋಲ್ ದರ ಹೆಚ್ಚಿಸಿದರೆ ಬಡವರು ಹೇಗೆ ಬದುಕಬೇಕು ಎಂದು ಪ್ರಶ್ನಿಸಿದರು.
ಪ್ರಧಾನಿ ಮೋದಿಗೆ ಜನಸಾಮಾನ್ಯರ ಮೇಲೆ ಕಾಳಜಿ ಇದ್ದರೆ ಇಂಧನದ ಮೇಲೆ ವಿಧಿಸಲಾಗಿರುವ ಸುಂಕವನ್ನು ಕಡಿಮೆ ಮಾಡಲಿ, ರಾಜ್ಯ ಸರ್ಕಾರಗಳು ಕೂಡ ಮಾಡಲಿ, ಇಂಧನ ಬೆಲೆ ಏರಿಕೆಯಿಂದ ಎಲ್ಲ ಅಗತ್ಯ ವಸ್ತುಗಳ ಬೆಲೆ ಕೂಡ ಹೆಚ್ಚಳವಾಗುತ್ತದೆ. ಇದರಿಂದ ಜನತೆಯ ಬದುಕುವುದು ಬಹಳ ಕಷ್ಟವಾಗಲಿದೆ, ದೇಶ ಹಾಳು ಮಾಡಬೇಡಿ ಎಂದು ಪ್ರಧಾನಿ ಮೋದಿಗೆ ನೇರವಾಗಿ ಹೇಳಿದ್ದಾರೆ.
ದೇಶದಲ್ಲಿ ಬಿಜೆಪಿ ಸರ್ಕಾರ ನರಕ ಸೃಷ್ಟಿಸುತ್ತಿದೆ. ಜನರಿಗೆ ತಪ್ಪು ಮಾಹಿತಿ ನೀಡಿ, ಸುಳ್ಳು ಹೇಳಿ ನರೇಂದ್ರ ಮೋದಿ ಅಧಿಕಾರ ಮಾಡುತ್ತಿದ್ದಾರೆ. ಮೋದಿ ಈ ದೇಶದ ಜನರ ರಕ್ತ ಹೀರುತ್ತಿದ್ದಾರೆ. ಬೆಲೆ ಏರಿಕೆ ಮಾಡಿ ಜನರ ರಕ್ತ ಕುಡಿಯುತ್ತಿದ್ದಾರೆ. ತಿಗಣೆಯಂತೆ ಜನರ ರಕ್ತ ಹೀರುತ್ತಿರುವ ಮೋದಿಗೆ ನಾಚಿಕೆ ಆಗುವುದಿಲ್ಲವಾ? ಎಂದು ವಾಗ್ದಾಳಿ ನಡೆಸಿದ್ದಾರೆ.
ಮನಮೋಹನ್ ಸರ್ಕಾರದದಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಅವರು ಹಾಹಾಕಾರ ಸೃಷ್ಟಿ ಮಾಡಿದ್ದರು. ನರೇಂದ್ರ ಮೋದಿ ಅವರು ಪ್ರತಿಭಟನೆ ಮಾಡಿದ್ದರು. ಜನರಿಗೆ ಸುಳ್ಳು ಭರವಸೆ ನೀಡಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದು, ಅಚ್ಛೇ ದಿನ್ ಆಯೇಂಗೆ ಎಂದು ಹೇಳಿದ್ದರು. ಇವತ್ತು ನರಕದ ದಿನಗಳ ಬಂದಿವೆ. ನಾವು ನರಕ ನೋಡಿರಲಿಲ್ಲ. ಆದರೆ, ಇದೀಗ ನರಕದ ದಿನಗಳನ್ನು ನೋಡುತ್ತಿದ್ದೇವೆ ಎಂಧು ಹೇಳಿದ್ದಾರೆ.